ಸುದ್ದಿಮೂಲ ವಾರ್ತೆ
ಬೆಂಗಳೂರು, ಏ.4: ರಾಜ್ಯ ಬಿಜೆಪಿ ಸರಕಾರವು ನಂಜನಗೂಡಿನ ದೇವಾಲಯದ ಹುಂಡಿಯ ಹಣವನ್ನು ಲಪಟಾಯಿಸಲು ಹೊರಟಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದ್ದಾರೆ.
ಬಿಜೆಪಿಯ ನಂಜನಗೂಡು ಶಾಸಕರು ದೇವಾಲಯದ ಹುಂಡಿ ಹಣವನ್ನು ಬೇರೆ ಉದ್ದೇಶಕ್ಕೆ ಬಳಕೆ ಮಾಡಿಕೊಳ್ಳುತ್ತಿರುವ ಬಗ್ಗೆ ಕಿಡಿಕಾರಿರುವ ಮಾಜಿ ಮುಖ್ಯಮಂತ್ರಿಗಳು, ಈ ಬಗ್ಗೆ ಸರಣಿ ಟ್ವೀಟ್ ಮಾಡಿದ್ದಾರೆ.
ಸ್ವಯಂ ಘೋಷಿತ ಧರ್ಮೋದ್ಧಾರಕರು, ಹಿಂದೂ ಧರ್ಮವನ್ನು ಗುತ್ತಿಗೆಗೆ ಪಡೆದುಕೊಂಡವರೆಂದು ಬೀಗುವವರಿಗೆ ಧರ್ಮವೆಂದರೆ ಅಧಿಕಾರಕ್ಕಿರುವ ರಾಜಮಾರ್ಗವಾಗಿದೆ. ದೇವರ ಹುಂಡಿ ಎಂಬುದು ಲಜ್ಜೆಗೆಟ್ಟು ಹೊಡೆದುಕೊಳ್ಳುವ ನಿಧಿ. ಇವರಿಗೆ ನಾಚಿಕೆ, ಸಂಕೋಚ ಎನ್ನುವುದು ಕನಿಷ್ಠಕ್ಕಿಂತ ಕಡಿಮೆ ಎನ್ನುವುದಕ್ಕೆ ಇಲ್ಲಿದೆ ಸಾಕ್ಷಿ ಎಂದು ಪ್ರಶ್ನಿಸುವ ಅವರು, ದೇವರ ಹುಂಡಿಗೆ ಬಿಜೆಪಿ ಕನ್ನ ಎಂದು ಆರೋಪಿಸಿದ್ದಾರೆ.
ನಾಡಿಗೆ ನಾಡೇ ಶ್ರದ್ಧಾಭಕ್ತಿಯಿಂದ ನಡೆದುಕೊಳ್ಳುವ ನಂಜನಗೂಡಿನ ಶ್ರೀ ನಂಜುಂಡೇಶ್ವರ ದೇವರ ಹುಂಡಿಗೆ ಬಿಜೆಪಿ ಶಾಸಕ ಬಿ.ಹರ್ಷವರ್ದನ್ ಅವರು ಕೈ ಹಾಕಿರುವುದು ದೈವಕ್ಕೆ ಎಸಗಿದ ಅಪಮಾನ. ಇದು ಯೋಜನೆಗಳ ಹೆಸರಿನಲ್ಲಿ ದೇವರ ಹುಂಡಿಗೂ ಕನ್ನ ಕೊರೆಯುವ ಬಿಜೆಪಿಯ ನೈಜ ಜಾಯಮಾನ. ಕಮಲಪಕ್ಷ ಮತ್ತೊಮ್ಮೆ ಬೆತ್ತಲಾಗಿದೆ ಎಂದು ಕುಮಾರಸ್ವಾಮಿ ಅವರು ಕುಟುಕಿದ್ದಾರೆ.
ಮುಜರಾಯಿ ದೇವಾಲಯದ ಆದಾಯ ಆಯಾ ದೇಗುಲದ ಅಭಿವೃದ್ಧಿಗೇ ಬಳಸಬೇಕು ಎನ್ನುವುದು ಕಾನೂನು. ರಾಜ್ಯ ಬಿಜೆಪಿ ಸರಕಾರ ಕಾನೂನನ್ನು ಗಾಳಿಗೆ ಬಿಟ್ಟು, ಶೇ 40 ಪರ್ಸೆಂಟ್ಗಾಗಿ ದೇವರ ದುಡ್ಡನ್ನೇ ನುಂಗಿನೀರು ಕುಡಿದು, ಆ ಹಣವನ್ನೂ ಚುನಾವಣೆಗೆ ಸುರಿಯಲು ಹೊರಟಿದೆ. ಪಾಪದ ಪಕ್ಷಕ್ಕೆ ಪ್ರಾಯಶ್ಚಿತ್ತ ತಪ್ಪದು. ಶ್ರೀ ನಂಜುಂಡೇಶ್ವರನ ಶಾಪವೂ ತಟ್ಟದೆ ಇರದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಹೇಳುವುದು ಒಂದು, ಮಾಡುವುದು ಇನ್ನೊಂದು. ಧರ್ಮ, ದೇವರು ಎನ್ನುವುದು ಬಿಜೆಪಿಗೆ ಮತಫಸಲು ಕೊಡುವ ಸಾಧನಗಳಷ್ಟೇ. ಶ್ರದ್ಧೆ, ಭಕ್ತಿ ಜನರದ್ದು; ಭುಕ್ತಿ ಮಾತ್ರ ಬಿಜೆಪಿಯದ್ದು. ನೀಚತನದ ಪರಮಾವಧಿ ಇದು. ಸಮುದಾಯ ಭವನಗಳ ನಿರ್ಮಾಣಕ್ಕೆ ದೇವರ ದುಡ್ಡೇ ಬೇಕೆ? ಕೇತ್ರಕ್ಕೆ ಸರಕಾರ ಕೊಟ್ಟ ಹಣ, ಶಾಸಕರ ವಿಶೇಷ ಅನುದಾನ ಇತ್ಯಾದಿಗಳೆಲ್ಲ ಎಲ್ಲಿ ಹೋದವು? ಎಂದು ಪ್ರಶ್ನಿಸಿದ್ದಾರೆ.
ರಾಜ್ಯ ಬಿಜೆಪಿ ಸರಕಾರವು ಶ್ರೀ ನಂಜುಂಡೇಶ್ವರ ದೇವರ ಹುಂಡಿಯನ್ನು ಎಗರಿಸುವ ಶಾಸಕರ ಧೂರ್ತ ಪ್ರಯತ್ನಕ್ಕೆ ತಡೆ ಹಾಕಬೇಕು. ಈ ಬಗ್ಗೆ ಹೊರಡಿಸಿರುವ ಆದೇಶವನ್ನು ಕೂಡಲೇ ಹಿಂಪಡೆಯಬೇಕು. ದೇವರ ದುಡ್ಡನ್ನು ದೇವಾಲಯದ ಅಭಿವೃದ್ಧಿಗೇ ಬಳಸಬೇಕು ಎಂದು ಅವರು ಒತ್ತಾಯ ಮಾಡಿದ್ದಾರೆ.