ಬೆಂಗಳೂರು, ಜೂ.13: ನಗರದ ಸಂಚಾರ ದಟ್ಟಣೆಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಂಕಲ್ಪ ಮಾಡಿರುವ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಅವರು ಇಂದು ನಗರದ ಪ್ರಮುಖ ಸಂಚಾರಿ ದಟ್ಟಣೆ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಿಡಿಎ ಕೇಂದ್ರ ಕಚೇರಿಯಲ್ಲಿ ಮಂಗಳವಾರ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಬಿಡಿಎ ಅಧ್ಯಕ್ಷ ರಾಕೇಶ್ ಸಿಂಗ್, ಆಯುಕ್ತ ಕುಮಾರ ನಾಯಕ, ಉಪಮುಖ್ಯಮಂತ್ರಿ ಆಪ್ತ ಕಾರ್ಯದರ್ಶಿ ರಾಜೇಂದ್ರ ಪ್ರಸಾದ್ ಹಾಗೂ ಮತ್ತಿತರ ಅಧಿಕಾರಿಗಳ ಜೊತೆ ಸಭೆ ನಡೆಸಿದರು.
ನಂತರ ಬೆಂಗಳೂರು ನಗರದ ಪ್ರದಕ್ಷಿಣೆ ಹಾಕಿದ ಶಿವಕುಮಾರ್ ಅವರು, ಮೊದಲು ಹೆಬ್ಬಾಳ ಜಂಕ್ಷನ್ ಗೆ ಭೇಟಿ ನೀಡಿ ಮೇಲ್ಸೇತುವೆ ನಿರ್ಮಾಣ, ಸುತ್ತಮುತ್ತಲ ಪ್ರದೇಶದ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಹೆಬ್ಬಾಳದಲ್ಲಿ ಸಂಚಾರ ದಟ್ಟಣೆ ನಿಯಂತ್ರಣ, ರಸ್ತೆ, ಮೇಲ್ಸೇತುವೆ ಅಗಲೀಕರಣ ಹಾಗೂ ಹೆಬ್ಬಾಳ ಕೆರೆಯ ಸೌಂದರ್ಯಕ್ಕೆ ಕೈಗೊಳ್ಳುವ ಕ್ರಮಗಳ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದರು. ಅಲ್ಲದೆ 2047ರ ವೇಳೆಗೆ ಹೆಚ್ಚಾಗುವ ವಾಹನ ದಟ್ಟಣೆಗೆ ಯಾವ ರೀತಿ ಕ್ರಮ ಕೈಗೊಳ್ಳಬಹುದು ಎಂದು ವಿವರಣೆಯನ್ನು ನೀಡಿ, 63 ಕಿ.ಮೀ. ಅವಳಿ ಸುರಂಗ ಮಾರ್ಗ ನಿರ್ಮಾಣದ ಬಗ್ಗೆ ಸಲಹೆ ನೀಡಿದರು.
ಹೆಬ್ಬಾಳದಲ್ಲಿ ಮೆಟ್ರೋ ಸ್ಟೇಷನ್, ಮೆಟ್ರೋ ಲೈನ್ಸ್ ನಿರ್ಮಾಣದ ಬಗ್ಗೆ ನುರಿತ ಇಂಜಿನಿಯರ್ ಗಳಿಂದ ಸ್ಥಳದಲ್ಲಿ ಮಾಹಿತಿ ಪಡೆದರು. ಮಹಿಳಾ ಪೌರ ಕಾರ್ಮಿಕರು ನಮಗೆ ಸ್ಥಳೀಯ ಆಧಾರ್ ಹಾಗೂ ಮತದಾರರ ಗುರುತಿನ ಚೀಟಿ ಇಲ್ಲ, ಹೀಗಾಗಿ ಪೌರ ಕಾರ್ಮಿಕ ಗುರುತಿನ ಚೀಟಿಗೆ ಉಚಿತ ಟಿಕೆಟ್ ಪ್ರಯಾಣಕ್ಕೆ ಅವಕಾಶ ಕಲ್ಪಿಸಿ ಎಂದು ಮನವಿ ಮಾಡಿದರು.
ಹೊರ ವರ್ತುಲ ರಸ್ತೆ, ನಾಗವಾರ ಮೇಲ್ಸೇತುವೆ, ಟೆಲಿಕಾಂ ಲೇಔಟ್ಗೆ ಭೇಟಿ ಮಾಡಿ ಅಲ್ಲಿ ನಡೆಯುತ್ತಿರುವ ಕೊಳಚೆ ನೀರು ಕಾಲುವೆ ಕಾಮಗಾರಿ ಪರಿಶೀಲನೆ ನಡೆಸಿದರು. ಮಳೆ ಬಂದಾಗ ಜಲಾವೃತವಾಗುತ್ತಿದ್ದ ಹಿನ್ನೆಲೆಯಲ್ಲಿ ಬಿಬಿಎಂಪಿ ರಾಜಕಾಲುವೆ, ತಡೆಗೋಡೆ ಕಾಮಗಾರಿ ಕೈಗೆತ್ತಿಕೊಂಡಿದ್ದು, ಪರಿಶೀಲನೆ ನಡೆಸಿದರು.
ಹೊರ ವರ್ತುಲ ರಸ್ತೆ, ಕಲ್ಯಾಣನಗರ, ಹೆಚ್.ಆರ್.ಬಿ.ಆರ್. ಬಡಾವಣೆಗೆ ಭೇಟಿ ನೀಡಿ ಕೊಳಚೆ ನೀರು ಕಾಲುವೆ ಕಾಮಗಾರಿ ಪರಿಶೀಲನೆ ನಡೆಸಿದರು. ಕೆ.ಆರ್. ಪುರಂಗೆ ಭೇಟಿ ನೀಡಿ ಬಿ.ಎಂ.ಆರ್.ಸಿ.ಎಲ್. ನಡೆಸುತ್ತಿರುವ ಮೆಟ್ರೋ ಕಾಮಗಾರಿ ಪರಿಶೀಲನೆ ನಡೆಸಿದರು.