ಸುದ್ದಿಮೂಲ ವಾರ್ತೆ
ತುಮಕೂರು,ಮಾ.30: ಸಾರ್ವತ್ರಿಕ ವಿಧಾನಸಭೆ ಚುನಾವಣೆ ಸಂಬಂಧ ಯಾವುದೇ ಸಭೆ, ಸಮಾರಂಭಗಳಿಗೆ ಹಾಗೂ ಇತರ ರಾಜಕೀಯ ಕಾರ್ಯಕ್ರಮಗಳಿಗೆ ಕಡ್ಡಾಯವಾಗಿ ಚುನಾವಣಾಧಿಕಾರಿಗಳಿಂದ
ಅನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದರು.
ತಮ್ಮ ಕಚೇರಿಯ ಸಭಾಂಗಣದಲ್ಲಿ ರಾಷ್ಟ್ರೀಯ ಹಾಗೂ ರಾಜ್ಯ ರಾಜಕೀಯ ಪಕ್ಷಗಳ ಮುಖಂಡರ ಜೊತೆ ಸಭೆ ನಡೆಸಿ ಮಾತನಾಡಿದ ಅವರು, ಪ್ರಜಾಪ್ರತಿನಿಧಿ ಕಾಯ್ದೆ 1951 ಕಲಂ 127ಎ ಅನ್ವಯ ಪ್ರಿಂಟಿಂಗ್ ಪ್ರೆಸ್ ಅವರು ಚುನಾವಣಾ ಕರಪತ್ರಗಳನ್ನು ಮುದ್ರಣ ಮಾಡುವ ಸಂದರ್ಭದಲ್ಲಿ ಚುನಾವಣಾಧಿಕಾರಿಗಳಿಗೆ ಮಾಹಿತಿ ನೀಡಬೇಕು ಹಾಗೂ ಚುನಾವಣಾ ಕರಪತ್ರದಲ್ಲಿ ಮುದ್ರಕರ ಹೆಸರು, ಪ್ರಕಾಶಕರ ಹೆಸರು ಹಾಗೂ ಮುದ್ರಣ ಮಾಡಿದ ಪ್ರಮಾಣದ ವಿವರಗಳನ್ನು ಕಡ್ಡಾಯವಾಗಿ ನಮೂದಿಸಬೇಕು ಎಂದು ಸೂಚಿಸಿದರು.
ನೋಂದಣಿಯಾಗದ ಸ್ಥಳೀಯ ಪತ್ರಿಕೆಗಳಿಗೂ ಸಹ ಜಿಲ್ಲೆ, ತಾಲ್ಲೂಕಿನ ಸಾಮಾನ್ಯ ದರಗಳನ್ನು ನಿಗದಿ ಮಾಡಲಾಗುವುದು. ಕೇಬಲ್ ಅಥವಾ ಸ್ಥಳೀಯ ಟಿ.ವಿ. ಆಪರೇಟರ್ಗಳು ಎಂಸಿಎಸಿ ವಿಭಾಗದ ಪೂರ್ವಾನುಮತಿ ಪಡೆಯದೆ ಯಾವುದೇ ಚುನಾವಣಾ ಸಂಬಂಧಿತ ಅಭ್ಯರ್ಥಿ, ಪಕ್ಷದ ಜಾಹೀರಾತುಗಳನ್ನು
ಪ್ರಸಾರ ಮಾಡಲು ಅವಕಾಶವಿರುವುದಿಲ್ಲ. ಎಲ್ಲಾ ಪ್ರಿಂಟಿಂಗ್ ಮಾಲೀಕರು, ಕೇಬಲ್ ಟಿ.ವಿ. ಆಪರೇಟರ್ಗಳು ಚುನಾವಣಾ ಆಯೋಗದ ಆದೇಶ ಮತ್ತು ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ತಿಳಿಸಿದರು.
ಜಿಲ್ಲೆಯಲ್ಲಿ ಮೇ 10 ರಂದು ನಡೆಯಲಿರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ವಿಕಲಚೇತನರು ಹಾಗೂ 80 ವರ್ಷ ಮೇಲ್ಪಟ್ಟ ಮತದಾರರು ಅಂಚೆ ಮತಪತ್ರಗಳ ಮೂಲಕ ಮತದಾನ ಮಾಡಲು ಇಚ್ಛಿಸಿದಲ್ಲಿ ನಮೂನೆ 12-ಡಿ ಯನ್ನು ಮತದಾರರ ಮನೆಗಳಿಗೆ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಇದೇ ಪ್ರಥಮ ಬಾರಿಗೆ ವಿಕಲಚೇತನರು ಹಾಗೂ 80 ವರ್ಷ ಮೇಲ್ಪಟ್ಟ ಮತದಾರರು ಅಂಚೆ ಮತ ಪತ್ರದ ಮೂಲಕ ಮತ ಚಲಾಯಿಸಲು ಚುನಾವಣಾ ಆಯೋಗ ನಮೂನೆ 12ಡಿ ಅನ್ನು ಪರಿಚಯಿಸಿದೆ. ಅಂಚೆ ಮತ ಪತ್ರದ ಮೂಲಕ ಮತ ಚಲಾಯಿಸಲು ಇಚ್ಛೆಪಟ್ಟು ನಮೂನೆ 12ಡಿಯಲ್ಲಿ ಅರ್ಜಿ ಸಲ್ಲಿಸಿದವರಿಗೆ ಮತಗಟ್ಟೆಗೆ
ಬಂದು ಮತ ಚಲಾಯಿಸಲು ಅವಕಾಶ ಇಲ್ಲವಾದ್ದರಿಂದ ನಮೂನೆ 12ಡಿ ಅರ್ಜಿ ಸಲ್ಲಿಸುವ ಮೊದಲೇ ನಿರ್ಧರಿಸಬೇಕಾಗುತ್ತದೆ ಎಂದು ತಿಳಿಸಿದರು.
ಚುನಾವಣೆ ಸಂದರ್ಭದಲ್ಲಿ ಮಾದರಿ ನೀತಿ ಸಂಹಿತೆ ಸಮರ್ಪಕ ಜಾರಿ ಹಾಗೂ ಅಕ್ರಮ ವಹಿವಾಟು/ಸಾಗಾಣಿಕೆಯನ್ನು ನಿಯಂತ್ರಿಸಲು ಜಿಲ್ಲೆಯಲ್ಲಿ 45 ಚೆಕ್ಪೋಸ್ಟ್ಗಳನ್ನು ಸ್ಥಾಪಿಸಲಾಗುವುದು. ಈಗಾಗಲೇ ಗಡಿ ಭಾಗದಲ್ಲಿ 7 ಚೆಕ್ಪೋಸ್ಟ್ಗಳು ಕಾರ್ಯ ನಿರ್ವಹಿಸುತ್ತಿವೆ. ಯಾವುದೆ ವ್ಯಕ್ತಿ 10 ಲಕ್ಷಕ್ಕಿಂತ ಹೆಚ್ಚಿನ ನಗದು
ಹಣವನ್ನು ತೆಗೆದುಕೊಂಡು ಹೋದಲ್ಲಿ ಅದಕ್ಕೆ ಪೂರಕ ದಾಖಲೆಗಳನ್ನು ಒದಗಿಸಬೇಕು. ಇಲ್ಲವಾದಲ್ಲಿ ಅದನ್ನು ಜಪ್ತಿ ಮಾಡಿ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪೂರ್ವಾಡ್, ಜಿಲ್ಲಾ ಪಂಚಾಯತ್ ಸಿಇಓ ಡಾ. ಕೆ. ವಿದ್ಯಾಕುಮಾರಿ, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ಪಾಲಿಕೆ ಆಯುಕ್ತ ಹೆಚ್.ವಿ. ದರ್ಶನ್, ತುಮಕೂರು ವಿಶ್ವವಿದ್ಯಾಲಯದ ಕುಲಸಚಿವೆ ನಹಿದಾ ಜಮ್ ಜಮ್ ಹಾಗೂ ವಿವಿಧ ಪಕ್ಷಗಳ ರಾಜಕೀಯ ಮುಖಂಡರು ಉಪಸ್ಥಿತರಿದ್ದರು.