ಸುದ್ದಿಮೂಲ ವಾರ್ತೆ
ಬೆಂಗಳೂರು, ಅ.26: ಹೌದು, ನಾನು ಸಿದ್ದರಾಮಯ್ಯಗೆ ರಾಜಕೀಯವಾಗಿ ವಿಲನ್. ಇಲ್ಲ ಎಂದವರು ಯಾರು? ಅವರಿಗೆ ನಾನು ವಿಲನ್ ಆಗದೇ ಸ್ನೇಹಿತ ಆಗಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಅವರು ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ತಾಜ್ನಲ್ಲಿ ಇದ್ದೆ ಅಂತ ಪದೇ ಪದೇ ಹೇಳ್ತಾರೆ. ತಾಜ್ನಲ್ಲಿ ನಾನು ಮೋಜು ಮಸ್ತಿ ಮಾಡ್ತಿರಲಿಲ್ಲ. ಅಭಿವೃದ್ಧಿ ಕೆಲಸದ ಚರ್ಚೆ ಮಾಡ್ತಿದ್ದೆ. ನನ್ನ ಬಳಿ ಎಲ್ಲಾ ದಾಖಲಾತಿ ಇದೆ ಎಂದರು.
ನನ್ನನ್ನು ಕಾಂಗ್ರೆಸ್ ನಾಯಕರು ಸಿಎಂ ಎನ್ನುವ ಗೌರವ ಇಲ್ಲದೆ ತೊಗಲುಗೊಂಬೆಯಂತೆ ರೀತಿಯಲ್ಲಿ ನಡೆಸಿಕೊಂಡು ಅಪಮಾನ ಮಾಡಿದರು. ನಾನು ಸಿಎಂ ಆದಾಗ ಕಾಂಗ್ರೆಸ್ ಶಾಸಕರು ಇಸ್ಪೀಟ್ ಎಲೆ ಎಸೆದ ಹಾಗೆ ಅವರ ಅಹವಾಲುಗಳನ್ನು ನನ್ನ ಟೇಬಲ್ ಮೇಲೆ ಎಸೆಯುತ್ತಿದ್ದರು. ಅಂತಹವರು ನನ್ನ ಬಗ್ಗೆ ವಿಲನ್ ಎಂದು ಹೇಳುತ್ತಿದ್ದಾರೆ ಎಂದು ತಿರುಗೇಟು ಕೊಟ್ಟರು ಕುಮಾರಸ್ವಾಮಿ.
ಸರಕಾರ ಬೀಳಿಸಿದ್ದ ಸಿದ್ದರಾಮಯ್ಯ:
ನನ್ನ ನೇತೃತ್ವದ ಸಮ್ಮಿಶ್ರ ಸರ್ಕಾರ ಬೀಳಿಸಿದ್ದು ಸಿದ್ದರಾಮಯ್ಯ ಅವರೇ. ಇದರಲ್ಲಿ ಎರಡು ಮಾತಿಲ್ಲ. ಬಿಜೆಪಿಯವರು ಸರ್ಕಾರ ಬೀಳಿಸಿದ್ದರು ಅಂತ ಹೇಳಿದ್ದೆ. ಆದರೆ ಅದಕ್ಕೆ ಬಿತ್ತನೆ ಹಾಕಿದ್ದು ಇದೇ ಸಿದ್ದರಾಮಯ್ಯ ಎಂದ ಅವರು ರಮೇಶ್ ಜಾರಕಿಹೋಳಿ ಯಾರು? ಅವರಿಗೂ ನನಗೂ ಯಾವ ಶತ್ರುತ್ವ ಇತ್ತಾ? ಬೆಳಗಾವಿ ರಾಜಕೀಯ ಸರಿ ಮಾಡಿ ಎಂದು ನಾನು ಇವರಿಗೆ ಹೇಳಿದೆ. ಇವರು ಸರಕಾರ ಬಿದ್ದು ಹೋಗಲಿ ಎಂದು ಸುಮ್ಮನಿದ್ದರು. ಆಗ ಬಿಜೆಪಿ ಜತೆ ಕೈ ಜೋಡಿಸಿದ್ದು ಸಿದ್ದರಾಮಯ್ಯ. ಅದಕ್ಕೆ ಸಮ್ಮಿಶ್ರ ಸರಕಾರ ಬಿದ್ದು ಹೋಯಿತು ಎಂದು ಅವರು ನೇರ ಆರೋಪ ಮಾಡಿದರು.
ಇಬ್ಬರು ಪಕ್ಷೇತರ ಶಾಸಕರನ್ನು ಮಂತ್ರಿ ಮಾಡಿಸಿದ್ದು ಸಿದ್ದರಾಮಯ್ಯ. ಬಿ.ಸಿ.ಪಾಟೀಲ್ ಅವರನ್ನು ಮಂತ್ರಿ ಮಾಡಲು ಹೇಳಿದ್ದೆ. ಆದರೆ ಸಿದ್ದರಾಮಯ್ಯ ಮಾಡಲಿಲ್ಲ. ನನ್ನ ಮಾತನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಶ್ರೀಮಂತ ಪಾಟೀಲ್, ಆರ್.ಶಂಕರ್ ಅವರನ್ನು ರೆಸಾರ್ಟ್ನಿಂದ ಕಳಿಸಿದ್ದು ಇದೇ ಸಿದ್ದರಾಮಯ್ಯ ಎಂದು ಟೀಕಾ ಪ್ರಹಾರ ನಡೆಸಿದ ಅವರು, ಅಪ್ಪ ನಿಮಗೊಂದು ನಮಸ್ಕಾರ. 14 ತಿಂಗಳು ನನ್ನನ್ನ ಅಧಿಕಾರದಲ್ಲಿ ಇಟ್ಟಿದ್ದಕ್ಕೆ ನಮೋ ನಮಃ. ಜನರ ಸೇವೆ ಮಾಡಲು ಅವಕಾಶ ಮಾಡಿಕೊಟ್ಟಿದ್ದಕ್ಕೆ ಎಂದು ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದರು ಅವರು.
ಗೃಹಲಕ್ಷ್ಮಿ ರಾಜಸ್ಥಾನದಲ್ಲಿ ಯಾಕೆ 10 ಸಾವಿರ ಕೊಡ್ತಿದ್ದೀರಾ? ಎಲ್ಲಾ ಕಡೆ ಗ್ಯಾರಂಟಿಗಳನ್ನು ಕೊಡುತ್ತಿದೆ ಕಾಂಗ್ರೆಸ್. ಈ ಕಾರಣಕ್ಕೆ ಎಲ್ಲ ಯೋಜನೆಗಳು ಹಳ್ಳ ಹಿಡಿದು ಹೋಗಿವೆ. ನಿಮ್ಮ ಗ್ಯಾರಂಟಿಗಳ ಬಗ್ಗೆ ಜನ ಛೀ ಥೂ ಎಂದು ಉಗಿಯೋ ಕಾಲ ಬರುತ್ತದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಚರ್ಚೆಗೆ ತಯಾರಿದ್ದೇನೆ:
ಬಹಿರಂಗ ಚರ್ಚೆಗೆ ಬರುವಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹಾಕಿರುವ ಸವಾಲನ್ನು ಸ್ವೀಕರಿಸಿದ್ದೇನೆ. ವಿಧಾನಸಭೆಯಲ್ಲಿಯೇ ಚರ್ಚೆ ಮಾಡಲು ನಾನು ತಯಾರಿದ್ದೇನೆ ಎಂದು ಕುಮಾರಸ್ವಾಮಿ ಹೇಳಿದರು.
ಹೆಚ್ಚು ಟಿಆರ್ ಪಿ ಇರುವ ಚಾನೆಲ್ ನಲ್ಲಿ ಬಹಿರಂಗ ಚರ್ಚೆಗೆ ಬನ್ನಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನನಗೆ ಬಹಿರಂಗ ಸವಾಲು ಹಾಕಿದ್ದಾರೆ. ಅದು ಹಾಗಿರಲಿ, ರಾಮನಗರ ಜಿಲ್ಲೆಯ ಅಭಿವೃದ್ಧಿಯನ್ನು ಯಾರು ಮಾಡಿದರು ಎಂಬ ವಿಷಯವೂ ಸೇರಿದಂತೆ; ಬ್ರ್ಯಾಂಡ್ ಬೆಂಗಳೂರು ಹೆಸರಿನಲ್ಲಿ ಬೆಂಗಳೂರು ಸುತ್ತ ಇರುವ ಭೂಮಿಗಳನ್ನು ಯಾರು ಕೊಳ್ಳೆ ಹೊಡೆಯಲು ಹೊರಟಿದ್ದಾರೆ ಎಂಬ ಬಗ್ಗೆಯೂ ಬಹಿರಂಗ ಚರ್ಚೆ ಸದನದಲ್ಲಿಯೇ ನಡೆಯಲಿ. ದಾಖಲೆ ಸಮೇತ ಚರ್ಚೆ ಮಾಡಲು ನಾನು ತಯಾರಿದ್ದೇನೆ ಎಂದು ಘೋಷಿಸಿದರು ಮಾಜಿ ಮುಖ್ಯಮಂತ್ರಿಗಳು.
ಕನಕಪುರ ಸೇರಿ ರಾಮನಗರ ಜಿಲ್ಲೆಯ ಭೂಮಿಯನ್ನು ಲೂಟಿ ಮಾಡಲು ಬೆಂಗಳೂರು ದಕ್ಷಿಣ ಜಿಲ್ಲೆ ಎನ್ನುತ್ತಿದ್ದಾರೆ. ಯಾರಿಗೆ ದಕ್ಷಣಿಯಾಗಿ ಕೊಡಲು ಬೆಂಗಳೂರು ದಕ್ಷಿಣ ಜಿಲ್ಲೆ ಮಾಡುತ್ತಿದ್ದಿರಿ? ಎಂದು ಅವರು ಪ್ರಶ್ನಿಸಿದರು.