ಸುದ್ದಿಮೂಲ ವಾರ್ತೆ
ಬೆಂಗಳೂರು,ಅ,28: ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಂತೆ ಪರಿಶಿಷ್ಟ ಸಮುದಾಯದಲ್ಲಿ ಒಳಮೀಸಲಾತಿ ಕಲ್ಪಿಸುವ ನ್ಯಾಯಮೂರ್ತಿ ಎ.ಜೆ ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸುವ ಸಂಬಂಧ ಕೂಡಲೇ ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕು ಎಂದು ವಿವಿಧ ದಲಿತಪರ ಸಂಘಟನೆಗಳು ಒತ್ತಾಯಿಸಿವೆ.
ರಾಜ್ಯ ಸರ್ಕಾರದ ವಿರುದ್ಧ ಇದೇ 31ರಂದು ನಗರದ ಪ್ರೀಡಂ ಪಾರ್ಕನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟದ ಪ್ರಧಾನ ಸಂಚಾಲಕ ಬಸವರಾಜ್ ಕೌತಾಳ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಪಜಾತಿಗಳ ವರ್ಗೀಕರಣ ಪ್ರಕ್ರಿಯೆಯನ್ನು ಆಂಧ್ರಪ್ರದೇಶ ಸರ್ಕಾರ ನಿರ್ವಹಿಸಿರುವ ಮಾದರಿಯನ್ನೇ ಅನುಸರಿಸಬೇಕು. ಕಳೆದ ಸರ್ಕಾರ ವಿಭಜನೆ ಮಾಡಿರುವ ಗುಂಪುಗಳಲ್ಲಿ ಚಲವಾದಿ ಮತ್ತು ಮಾದಿಗ ಸಮುದಾಯಗಳ ಉಪ ಜಾತಿಗಳು ಅವುಗಳಿಂದ ದೂರಸರಿದಿವೆ. ಸದಾಶಿವ ಆಯೋಗ ನೀಡಿರುವ ಅನುಪಾತಕ್ಕೆ ಅನುಸಾರವಾಗಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ 2023ರ ವಿಧಾನ ಸಭಾ ಚುನಾವಣೆಯ ಪಕ್ಷದ ಪ್ರಣಾಳಿಕೆಯನ್ನು ಮಂಡಿಸಿರುವಂತೆ ಒಳ ಮೀಸಲಾತಿ ಜಾರಿಗೆ ತರಬೇಕಾದ ಸಂಸದೀಯ ಕರ್ತವ್ಯಗಳನ್ನು ನಿರ್ವಹಿಸಬೇಕು ಎಂದು ಹೇಳಿದರು.
ಅಲೆಮಾರಿ ಮಹಾ ಒಕ್ಕೂಟದ ಜಿಲ್ಲಾಧ್ಯಕ್ಷ ಮಾರ್ಕಂಡೇಯ ನಾಯ್ಕ, ಬಹುಜನ ಸಮಾಜದ ಮುಖಂಡ ಗುರುಮೂರ್ತಿ, ಪಿಟಿಸಿಎಲ್ ಭೂಮಿ ವಂಚಿತರ ಹೋರಾಟ ಸಮಿತಿ ಮುಖಂಡ ಮಂಜುನಾಥ್, ಪ್ರಜಾಸತ್ತಾತ್ಮಕ ದಲಿತ ವಿದ್ಯಾರ್ಥಿ ಒಕ್ಕೂಟದ ರಾಜ್ಯ ಸಂಚಾಲಕ ವೇಣು ಗೋಪಾಲ್ ಮೌರ್ಯ, ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ಮಂಜುನಾಥ ಮರಾಟ, ವಿದ್ಯಾರ್ಥಿ ಒಕ್ಕೂಟದ ಕಾರ್ಯದರ್ಶಿ ವಸಂತ್ ಕುಮಾರ್ ಮೌರ್ಯ ಅವರು ಸರ್ಕಾರ ಕೂಡಲೇ ವರದಿ ಜಾರಿಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕು ಎಂದು ಹೇಳಿದರು.