Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಳೆಗಾಲದಲ್ಲಿ ವಿಪತ್ತು ನಿರ್ವಹಣೆಗೆ ವಾರ್ಡ್‌ಗೆ ಒಬ್ಬ ಇಂಜಿನಿಯರ್

ಸುದ್ದಿಮೂಲ ವಾರ್ತೆ

ಬೆಂಗಳೂರು, ನ.7: ಬಿಬಿಎಂಪಿ ವ್ಯಾಪ್ತಿಯಲ್ಲಿ ಇನ್ನೂ 2-3 ದಿನಗಳ ಕಾಲ ಮಳೆಯಾಗುವ ಮುನ್ಸೂಚನೆಯಿದ್ದು, ಈ ಕೂಡಲೇ ವಿಪತ್ತು ನಿರ್ವಹಣೆಗಾಗಿ ಪ್ರತಿ ವಾರ್ಡ್‌ನಲ್ಲೂ ಒಬ್ಬ ಇಂಜಿನಿಯರ್‌ಗೆ ಜವಾಬ್ದಾರಿ ವಹಿಸಲು ಆಡಳಿತಾಧಿಕಾರಿ ರಾಕೇಶ್ ಸಿಂಗ್ ಅವರು ಎಲ್ಲಾ ವಲಯ ಆಯುಕ್ತರಿಗೆ ಸೂಚನೆ ನೀಡಿದರು.

ಬೆಂಗಳೂರಿನ ವಿವಿಧೆಡೆ ನಿನ್ನೆ ರಾತ್ರಿ ಹಲವು ಗಂಟೆಗಳ ಕಾಲ ನಿರಂತರವಾಗಿ ಮಳೆ ಸುರಿದ ಹಿನ್ನೆಲೆಯಲ್ಲಿ ಇಂದು ವರ್ಚ್ಯುವಲ್ ಮೂಲಕ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ವಿಪತ್ತು ನಿರ್ವಹಣೆ, ರಸ್ತೆ ಗುಂಡಿ, ಕಸದ ಸಮಸ್ಯೆ, ಪಾದಚಾರಿ ಮಾರ್ಗ ದುರಸ್ತಿಪಡಿಸುವ ಸಲುವಾಗಿ ಪ್ರತಿ ವಾರ್ಡ್‌ನಲ್ಲೂ ಪ್ರತ್ಯೇಕವಾಗಿ ಒಬ್ಬೊಬ್ಬ ಇಂಜಿನಿಯರ್ ಗೆ ಜವಾಬ್ದಾರಿ ನೀಡಲು ಸೂಚಿಸಿದರು.

ಮೆಟ್ರೋ, ಬೆಸ್ಕಾಂ, ಜಲಮಂಡಳಿ ಕೆಲಸ ನಡೆಯುವ ಸ್ಥಳದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಜೊತೆಗೆ ಸಂಬಂಧಪಟ್ಟ ಇಲಾಖೆಗಳಿಗೆ ತ್ವರಿತವಾಗಿ ಕಾಮಗಾರಿಯನ್ನು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಬೇಕು. ಎಲ್ಲಾದರು ಸಮಸ್ಯೆ ಇದ್ದರೆ ಅದಕ್ಕೆ ತಾತ್ಕಾಲಿಕ ವ್ಯವಸ್ಥೆ ಮಾಡಿ ನಂತರ ಶಾಶ್ವತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಕೆಲಸ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮಾತನಾಡಿ, ನಗರದಲ್ಲಿ ಇನ್ನೂ 2 ರಿಂದ 3 ದಿನಗಳವರೆಗೆ ಮಳೆ ಬೀಳುವ ಮುನ್ಸೂಚನೆ ಇರುವುದರಿಂದ ಮಳೆಹಾನಿ ತಡೆಗೆ ಎಲ್ಲಾ ಅಧಿಕಾರಿಗಳು ಸಜ್ಜಾಗಿರುವಂತೆ ಸೂಚಿಸಿದರು.

ನಗರದಲ್ಲಿ ಜೋರು ಮಳೆಯಾಗುವ ಸಮಯದಲ್ಲಿ ರಸ್ತೆಗಳ ಮೇಲೆ ಹೆಚ್ಚು ನೀರು ನಿಂತು ವಾಹನಗಳ ಸಂಚಾರಕ್ಕೆ ಹೆಚ್ಚು ಸಮಸ್ಯೆಯಾಗುತ್ತದೆ. ಈ ನಿಟ್ಟಿನಲ್ಲಿ ರಸ್ತೆ ಮೇಲೆ ಬೀಳುವ ನೀರು ಚರಂಡಿಗಳಿಗೆ ಸರಾಗವಾಗಿ ಹರಿದು ಹೋಗುವ ನಿಟ್ಟಿನಲ್ಲಿ ಶೋಲ್ಡರ್ ಡ್ರೈನ್‌ಗಳ ಬಳಿ ಸ್ವಚ್ಚತೆ ಕಾಪಾಡಲು ಸೂಚಿಸಿದರು.

ಮೆಟ್ರೋ ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಅಳವಡಿಸಿರುವ ತಾತ್ಕಾಲಿಕ ಬ್ಯಾರಿಕೇಡ್ ಗಳಿಂದ ಕೆಲವೆಡೆ ಮಳೆ ನೀರು ನಿಲ್ಲುತ್ತದೆ. ಇದರಿಂದ ವಾಹನ ಸಂಚಾರಕ್ಕೆ ಸಾಕಷ್ಟು ಸಮಸ್ಯೆಯಾಗಲಿದ್ದು, ಮೆಟ್ರೊ ಅಧಿಕಾರಿಗಳ ಜೊತೆ ಸಮನ್ವಯ ಸಾಧಿಸಿ ಇರುವ ಸಮಸ್ಯೆಯನ್ನು ಬಗೆಹರಿಸಿಕೊಂಡು ನೀರು ನಿಲ್ಲದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸರ್ವೀಸ್ ರಸ್ತೆಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಮಳೆಯಾಗುವ ವೇಳೆ ಅರಣ್ಯ ವಿಭಾಗದ ತಂಡಗಳು ಸದಾ ಸನ್ನದ್ಧರಾಗಿರಬೇಕು. ಆಯಾ ವಲಯ ವ್ಯಾಪ್ತಿಯಲ್ಲಿ ಜಲಾವೃತವಾಗುವ ಸ್ಥಳಗಳಲ್ಲಿ ಪಂಪ್ ಗಳನ್ನಿಟ್ಟು ನೀರು ತೆರವುಗೊಳಿಸಬೇಕು. ರಸ್ತೆ ಬದಿ ಚರಂಡಿ ಹಾಗೂ ರಾಜಕಾಲುವೆಗಳಲ್ಲಿ ಹೂಳನ್ನು ಕಾಲಕಾಲಕ್ಕೆ ತೆರವುಗೊಳಿಸುತ್ತಿರಬೇಕು. ತೆರವುಗೊಳಿಸಿದ ಹೂಳನ್ನು ಕೂಡಲೇ ಸ್ಥಳದಿಂದ ತೆರವು ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮನೆಗಳಿಗೆ ನೀರು ನುಗ್ಗಿರುವ ಪಟ್ಟಿ ಸಿದ್ದಪಡಿಸಿ:

ನಗರದಲ್ಲಿ ನಿನ್ನೆ ಮಳೆಯಾದ ವೇಳೆ ಆಯಾ ವಲಯದಲ್ಲಿ ಎಷ್ಟು ಮನೆಗಳಿಗೆ ನೀರು ನುಗ್ಗಿದೆ ಎಂಬುದನ್ನು ಗುರುತಿಸಿ ಪರಿಹಾರ ನೀಡುವ ಕೆಲಸ ಮಾಡಬೇಕು. ಈ ಸಂಬಂಧ ಯಾವ ವಲಯದಲ್ಲಿ ಎಷ್ಟು ಮನೆಗಳಿಗೆ ನೀರು ನುಗ್ಗಿದೆ ಎಂಬ ಪಟ್ಟಿಯನ್ನು ಸಿದ್ದಪಡಿಸಲು ಆಯಾ ವಲಯ ಆಯುಕ್ತರಿಗೆ ಸೂಚನೆ ನೀಡಿದರು.

ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿರುವುದರಿಂದ ಬೆಳ್ಳಂದೂರು ಹಾಗೂ ವರ್ತೂರು ಕೆರೆಯ ಸ್ಲೂಯಿಸ್ ಗೇಟ್ ಗಳನ್ನು ಕೂಡಲೇ ತೆಗೆದು ನೀರನ್ನು ಹೊರಬಿಡಲು ಬಿಡಿಎ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಆಡಳಿತಾಧಿಕಾರಿ ರಾಕೇಶ್ ಸಿಂಗ್ ರವರು ಸಭೆಯಲ್ಲಿ ತಿಳಿಸಿದರು.

ಮಳೆಗಾಲದ ವೇಳೆ ಪಾಲಿಕೆಯ ಜೊತೆ ಅಗ್ನಿ ಶಾಮಕ ಇಲಾಖೆ, ಎಸ್.ಡಿ.ಆರ್.ಎಫ್ ಹಾಗೂ ಎನ್.ಡಿ.ಆರ್.ಎಫ್ ಇಲಾಖೆಗಳು ಕೈಜೋಡಿಸಲಿದ್ದಾರೆ. ಈ ಸಂಬಂಧ ಆಯಾ ವಲಯ ಆಯುಕ್ತರು ಸದರಿ ಇಲಾಖೆಗಳ ಜೊತೆ ನಿತ್ಯ ಸಂಪರ್ಕದಲ್ಲಿದ್ದು, ತುರ್ತು ಪರಿಸ್ಥಿತಿಯ ವೇಳೆ ಸದರಿ ಇಲಾಖೆಗಳ ಸಹಾಯ ಪಡೆದು ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗುಂಡಿಗಳನ್ನು ಮುಚ್ಚಿ:

ಪಾಲಿಕೆ ವ್ಯಾಪ್ತಿಯಲ್ಲಿ ಬರುವ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ತ್ವರಿತಗತಿಯಲ್ಲಿ ಮುಚ್ಚಬೇಕು. ರಸ್ತೆಗುಂಡಿ ಮುಚ್ಚಲು ಟೆಂಡರ್ ಪ್ರಕ್ರಿಯೆ ನಡೆಯದಿದ್ದರೆ ಕೂಡಲೆ ಟೆಂಡರ್ ಕರೆದು ರಸ್ತೆ ಗುಂಡಿಗಳನ್ನು ಮುಚ್ಚಬೇಕು. ಮಳೆಗಾಲದ ವೇಳೆ ಕೋಲ್ಡ್ ಮಿಕ್ಸ್ ಅನ್ನು ಬಳಸಿ ರಸ್ತೆ ಗುಂಡಿಗಳನ್ನು ಮುಚ್ಚಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಯೋಜನಾ ವಿಭಾಗದ ವಿಶೇಷ ಆಯುಕ್ತರಾದ ಡಾ. ತ್ರಿಲೋಕ್ ಚಂದ್ರ, ಎಲ್ಲಾ ವಲಯ ಆಯುಕ್ತರು, ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರು, ವಲಯ ಜಂಟಿ ಆಯುಕ್ತರು, ಮುಖ್ಯ ಅಭಿಯಂತರರು, ಅಗ್ನಿ ಶಾಮಕ ಇಲಾಖೆ, ಎನ್.ಡಿ.ಆರ್.ಎಫ್ ಇಲಾಖೆಯ ಅಧಿಕಾರಿಗಳು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ