ಫೋಕ್ಸೋ ಕಾಯ್ದೆ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಅಗತ್ಯ
ಸುದ್ದಿಮೂಲ ವಾರ್ತೆ
ತುಮಕೂರು, ಆ.18 : ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ ಫೋಕ್ಸೋ ಕಾಯ್ದೆ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಸಲುವಾಗಿ ನಾಮಫಲಕಗಳನ್ನು ಅಳವಡಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿಂದು ತುಮಕೂರು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ಮಿಷನ್ ವಾತ್ಸಲ್ಯ ಯೋಜನೆಯಡಿ ಜಿಲ್ಲಾ ಮಟ್ಟದ ಮಕ್ಕಳ ಕಲ್ಯಾಣ ಹಾಗೂ ರಕ್ಷಣಾ ಸಮಿತಿಯ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಏಪ್ರಿಲ್ ನಿಂದ ಜುಲೈ ತಿಂಗಳ ಅಂತ್ಯಕ್ಕೆ ಹೊಸದಾಗಿ ಪೊಕ್ಸೊ ಕಾಯ್ದೆಯಡಿ 47 ಪ್ರಕರಣಗಳು ದಾಖಲಾಗಿವೆ. ಹೆಚ್ಚಾಗಿ ಕೊರಟಗೆರೆ, ಮಧುಗಿರಿ, ಗುಬ್ಬಿ ಕುಣಿಗಲ್ ತಾಲ್ಲೂಕುಗಳಲ್ಲಿ ಪ್ರಕರಣಗಳು ದಾಖಲಾಗುತ್ತಿವೆ. ಹಿಂದಿನ ಸಾಲಿನ ಬಾಕಿ ಪ್ರಕರಣಗಳು 127 ಸೇರಿದಂತೆ ಒಟ್ಟು 174 ಪ್ರಕರಣಗಳು ದಾಖಲಾಗಿವೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಭಿಕ್ಷಾಟನೆ ಮಾಡುವವರ ಸಂಖ್ಯೆ ಹೆಚ್ಚಾಗಿರುವ ಕಾರಣ ಎಲ್ಲಾ ಇಲಾಖೆಗಳ ಸಹಕಾರದೊಂದಿಗೆ ಅವರನ್ನು ನಿರಾಶ್ರಿತರ ಕೇಂದ್ರಗಳಿಗೆ ಬಿಡುವಂತೆ ಕ್ರಮವಹಿಸಬೇಕು. ಪ್ರತಿ ಶಾಲೆಗಳಲ್ಲಿ ಮೀನಾ ತಂಡವನ್ನು ರಚನೆ ಮಾಡಲಾಗಿದೆ. ಇದರ ಮೂಲಕ ವಿದ್ಯಾರ್ಥಿಗಳಿಗೆ ಪೋಕ್ಸೋ ಹಾಗೂ ಬಾಲ್ಯವಿವಾಹ ಕುರಿತು ಅರಿವು ಮೂಡಿಸಲಾಗುತ್ತಿದೆ ಎಂದು ಸಭೆಗೆ ಡಿಡಿಪಿಐ ಮಾಹಿತಿ ನೀಡಿದರು.
ಜಿಲ್ಲೆಯ ಎಲ್ಲಾ ಶಾಲೆಗಳ ಶಿಕ್ಷಕರಿಗೆ ತಾಲ್ಲೂಕು ಮಟ್ಟದಲ್ಲಿ ಪೊಕ್ಸೊ
ಕಾಯ್ದೆ ಕುರಿತು ಒಂದು ದಿನದ ಕಾರ್ಯಾಗಾರವನ್ನು ಆಯೋಜಿಸಬೇಕು. ಜಿಲ್ಲೆಯ ಎಲ್ಲಾ ವಸತಿ ನಿಲಯಗಳ ಸಿಬ್ಬಂದಿ, ವಾರ್ಡನ್, ವಿದ್ಯಾರ್ಥಿಗಳಿಗೆ ಪೊಕ್ಸೊ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಪ್ರಸ್ತುತ ದಿನಗಳಲ್ಲಿ ಶಾಲೆ ಹಾಗೂ ಕಾಲೇಜು ಹಂತದಲ್ಲಿ ಈ ರೀತಿಯ ಪ್ರಕರಣಗಳು ನಡೆಯುತ್ತಿವೆ. ಪೊಕ್ಸೊ ಕುರಿತು ಮಕ್ಕಳಿಗೆ ಅರಿವು ಮೂಡಿಸುವುದರ ಜೊತೆಗೆ ಅದರಿಂದಾಗುವ ದುಷ್ಪರಿಣಾಮಗಳ ಬಗ್ಗೆಯೂ ತಿಳಿಸಬೇಕು ಎಂದರು.
ಸಭೆಯಲ್ಲಿ ಡಿವೈಎಸ್ಪಿ ಶ್ರೀನಿವಾಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ಶ್ರೀಧರ್, ಡಿಹೆಚ್ಓ ಡಾ: ಮಂಜುನಾಥ್, ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಅನುಷಾ, ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿ ಗಂಗಪ್ಪ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.