ಅಕ್ರಮ ಗೋ ಸಾಗಾಣಿಕೆ : ಚೆಕ್ ಪೋಸ್ಟ್ ಗಳ ಸ್ಥಾಪನೆ
ಸುದ್ದಿಮೂಲ ವಾರ್ತೆ
ತುಮಕೂರು, ಜೂ.26 : ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಜಾನುವಾರುಗಳ ಅಕ್ರಮ ಸಾಗಾಣಿಕೆ ಸಂಬಂಧ ಜಿಲ್ಲೆಯ ಗಡಿಭಾಗಗಳಲ್ಲಿ 38 ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಲಾಗಿದ್ದು, ಪೊಲೀಸ್ ಸಿಬ್ಬಂದಿಗಳ ಸಹಕಾರದೊಂದಿಗೆ ಪಶುವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ನಿಯೋಜಿಸಿ ಅಕ್ರಮ ಜಾನುವಾರು ಸಾಗಾಣಿಕೆ ತಡೆಗಟ್ಟುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಾಣಿ ದಯಾ ಸಂಘ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಜಾನುವಾರು ಸಾಗಾಣಿಕೆ, ಜಾತ್ರೆ, ಸಂತೆ, ನಡೆಯುವ ಸ್ಥಳಗಳಿಂದ ಜಾನುವಾರುಗಳನ್ನು ಅಧಿಕೃತವಾಗಿ ಸಾಗಾಣಿಕೆ ಮಾಡುವ ಸಮಯದಲ್ಲಿ
ಜಾನುವಾರು ಮಾಲೀಕರು ಸಾಗಾಣಿಕೆ ಪರವಾನಿಗೆ ಪತ್ರವನ್ನು ಹಾಗೂ ಆರೋಗ್ಯ ದೃಢೀಕರಣ ಪತ್ರವನ್ನು ಸ್ಥಳೀಯ ಪಶುವೈದ್ಯಾಧಿಕಾರಿಗಳಿಂದ ಪಡೆದು, ಜಾನುವಾರು ಮಾರಾಟಕ್ಕೆ
ಸಂಬಂಧಿಸಿದಂತೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಿಂದ ರಶೀದಿ ಪಡೆಯುವುದು ಮತ್ತು ಜಾನುವಾರು ಸಾಗಾಣಿಕೆಗೆ ಸಾರಿಗೆ ಅಧಿಕಾರಿಗಳಿಂದ ಪರವಾನಗಿ ಪಡೆದ ವಾಹನದಲ್ಲಿಯೇ ಸಾಗಾಣಿಕೆ ಮಾಡಬೇಕು. ಈ ಬಗ್ಗೆ ರೈತರಿಗೆ ಅರಿವು ಮೂಡಿಸುವಂತೆ ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಅಧಿಕೃತ ಕಸಾಯಿಖಾನೆಗಳಿರುವ ಬಗ್ಗೆ ಚರ್ಚಿಸಿ, ಮಹಾನಗರ ಪಾಲಿಕೆ, ಪುರಸಭೆ ಮತ್ತು ನಗರಸಭೆ ಮುಖ್ಯಾಧಿಕಾರಿಗಳು ಮಾಹಿತಿ ಸಂಗ್ರಹಿಸುವ ಕುರಿತು ಕ್ರಮವಹಿಸುವಂತೆ ಅವರು ಸೂಚಿಸಿದರು.
ಕೋಳಿಗಳ ತ್ಯಾಜ್ಯಗಳನ್ನು ಸಾರ್ವಜನಿಕ ಸ್ಥಳದಲ್ಲಿ ಹಾಗೂ ಕೆರೆ ಅಂಗಳದಲ್ಲಿ ಬಿಸಾಡುವ ಕೋಳಿ ಅಂಗಡಿ ಮಾಲೀಕರಿಗೆ ಎಚ್ಚರಿಕೆ ನೀಡುವುದು ಮತ್ತು ಈ ಬಗ್ಗೆ ಸಾರ್ವಜನಿಕ ಸ್ಥಳದಲ್ಲಿರುವ ಸಿ.ಸಿ ಕ್ಯಾಮರಗಳನ್ನು ಪರಿಶೀಲಿಸಿ ತ್ಯಾಜ್ಯ ಹಾಕುವವರಿಗೆ ದಂಡ ಹಾಕುವಂತೆ ಸೂಚಿಸಿದರಲ್ಲದೇ, ತುಮಕೂರು ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಿದ್ದು ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಮಹಾನಗರ ಪಾಲಿಕೆಯ ಆಯುಕ್ತರಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ: ಕೆ.
ವಿದ್ಯಾಕುಮಾರಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮರಿಯಪ್ಪ, ಪಶು ಸಂಗೋಪನೆ ಇಲಾಖೆಯ ಉಪನಿರ್ದೇಶಕ ಡಾ. ಜಯಣ್ಣ ಡಿಡಿಪಿಐ ನಂಜಯ್ಯ ಹಾಗೂ ಜಿಲ್ಲಾ ಪ್ರಾಣಿ ದಯಾ ಸಂಘದ ಸದಸ್ಯರು ಉಪಸ್ಥಿತರಿದ್ದರು.
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.