Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಧಾನಸೌಧದಲ್ಲಿ ಹೆಚ್.ಡಿ.ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಜಂಟಿ ಮಾಧ್ಯಮಗೋಷ್ಠಿ

ಬೆಂಗಳೂರು: ಅಕ್ರಮಗಳ ಆಗರವಾಗಿರುವ ಹಾಗೂ ರಾಜ್ಯದ ಜನತೆಗೆ ವಂಚನೆ ಎಸಗಿರುವ ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ - ನೈಸ್ ಯೋಜನೆಯನ್ನು ಸಂಪೂರ್ಣವಾಗಿ ಸರಕಾರದ ವಶಕ್ಕೆ ಪಡೆಯಬೇಕು ಎಂದು ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ರಾಜ್ಯ ಸರಕಾರವನ್ನು ಒಟ್ಟಾಗಿ ಒತ್ತಾಯ ಮಾಡಿವೆ.

ವಿಧಾನಸೌಧದಲ್ಲಿರುವ ಜೆಡಿಎಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಜಂಟಿ ಮಾಧ್ಯಮಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಬಸರಾಜ್ ಬೊಮ್ಮಾಯಿ ಅವರು; ನೈಸ್ ಯೋಜನೆಯನ್ನು ಯಾವ ಮುಲಾಜು ಇಲ್ಲದೆ ಸರಕಾರದ ವಶಕ್ಕೆ ಪಡೆಯಬೇಕು ಹಾಗೂ ಉನ್ನತ ಮಟ್ಟದ ತನಿಖೆ ನಡೆಯಬೇಕು ಎಂದು ಆಗ್ರಹಪಡಿಸಿದರು.

ಕಿಕ್ಕಿರಿದ ಮಾಧ್ಯಮಗೋಷ್ಠಿಯಲ್ಲಿ ನೈಸ್ ಅಕ್ರಮಗಳನ್ನು ಎಳೆಎಳೆಯಾಗಿ ಬಿಡಿಸಿಟ್ಟು ಉಭಯ ನಾಯಕರು; ಜಂಟಿ ಸದನ ಸಮಿತಿ ವರದಿಯ ಪ್ರಕಾರ ಹಾಗೂ ನ್ಯಾಯಾಲಯಗಳು ನೀಡಿರುವ ಆದೇಶದಂತೆ ಆ ಇಡೀ ಯೋಜನೆಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಒಂದು ವೇಳೆ ಯೋಜನೆಯನ್ನು ವಶಕ್ಕೆ ಪಡೆಯದಿದ್ದರೆ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಸದನದ ಒಳಗೆ - ಹೊರಗೆ ಜಂಟಿ ಹೋರಾಟ ನಡೆಸಲಿವೆ ಎಂದು ಇಬ್ಬರೂ ನಾಯಕರು ಸರಕಾರಕ್ಕೆ ಎಚ್ಚರಿಕೆ ನೀಡಿದರು.

ನೈಸ್ ಅಕ್ರಮ ರಾಜ್ಯದಲ್ಲಿ ಹಾಡುಹಗಲೇ ನಡೆದಿರುವ ಲೂಟಿ. ಜನರ ಭೂಮಿ ಹಾಗೂ ಹಣವನ್ನು ಕೊಳ್ಳೆ ಹೊಡೆಯಲಾಗಿದೆ ಎಂದು ಕುಮಾರಸ್ವಾಮಿ ಅವರು ಹೇಳಿದರೆ, ಈ ಹೋರಾಟ ಇಲ್ಲಿಗೇ ನಿಲ್ಲುವುದಿಲ್ಲ. ನೈಸ್ ವಿರುದ್ಧದ ನಮ್ಮ ಹೋರಾಟ ಹಲವಾರು ಮಜಲುಗಳನ್ನು ಮುಟ್ಟಲಿದೆ ಎಂದರು.

ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದು;

ರಾಜ್ಯದ ಮುಖ್ಯಮಂತ್ರಿ ಭ್ರಷ್ಟಾಚಾರದ ಬಗ್ಗೆ ಉದ್ದುದ್ದ ಮಾತನಾಡುತ್ತಾರೆ. ಆದರೆ ನೈಸ್ ರಸ್ತೆಯ ಅಕ್ರಮ ಬಗ್ಗೆ ಏಕೆ ಮಾತನಾಡುತ್ತಿಲ್ಲ? ಬಸವರಾಜ ಬೊಮ್ಮಾಯಿ ಅವರ ಸರಕಾರದ ಕಾಲದಲ್ಲಿ ಈ ಅಕ್ರಮಕ್ಕೆ ಸಂಬಂಧಿಸಿದಂತೆ ಅನೇಕ ಕ್ರಮಗಳು ಜರುಗಿವೆ. ನ್ಯಾಯಾಲಯಗಳಲ್ಲಿ ನೈಸ್ ವಿರುದ್ಧ, ಸರಕಾರದ ಪರವಾಗಿ ಅನೇಕ ಆದೇಶಗಳು ಬಂದಿವೆ. ಇದಕ್ಕೆ ಹಿಂದಿನ ಬಿಜೆಪಿ ಸರಕಾರದ ಶ್ರಮಿಸಿದೆ. ಅದಕ್ಕಾಗಿ ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಅಭಿನಂದಿಸುತ್ತೇನೆ.

ಈ ಬಗ್ಗೆ ಸದನದಲ್ಲಿ ಚರ್ಚೆಗೆ ಅವಕಾಶ ಕೇಳಿದದ್ದೇವು. ಮೊದಲು ಸದನದಲ್ಲಿ ನಿಲುವಳಿ ಸೂಚನೆ ಮಂಡಿಸಿದೆವು. ಬಳಿಕ ಅದನ್ನು ನಿಯಮ 69ಕ್ಕೆ ಬದಲಿಸಿ ಚರ್ಚೆಗೆ ಅವಕಾಶ ಕೊಡುತ್ತೇವೆ ಎಂದರು. ಆದರೂ ಅವಕಾಶ ಸಿಗಲಿಲ್ಲ.

ನಾಡಿನ ಹಿತಾಸಕ್ತಿ ಕಾಪಾಡಲು ನಾವು ಬಿಜೆಪಿ ಜತೆ ಹೋರಾಟಕ್ಕೆ ಮುಂದಾಗಿದ್ದೇವೆ. ಜನರ ಭೂಮಿ ಕಬಳಿಸುವ ಈ ಈಸ್ಟ್ ಇಂಡಿಯಾ ಕಂಪನಿ ವಿರುದ್ಧ ಹೋರಾಡುತ್ತೇವೆ. ಸರಕಾರ ಸದನ ಸಮಿತಿ ವರದಿ ಇಟ್ಟುಕೊಂಡು ಸುಮ್ಮನಿದ್ದರೆ ಯಾರಿಗೆ ಲಾಭ? ಈ ಯೋಜನೆಯನ್ನೂ ಸ್ಕ್ರಾಪ್ ಮಾಡಿದರೆ ₹30,000 ಕೋಟಿ ಹಣ ಸಿಗುತ್ತದೆ. ಭಾಗ್ಯಗಳಿಗೆ ಅದನ್ನು ಬಳಸಿ.

ಈಗ ಬ್ರ್ಯಾಂಡ್ ಬೆಂಗಳೂರು ಎಂದು ಜಪ ಮಾಡುತ್ತಿರುವವರೇ ಹಿಂದೆ ನೈಸ್'ನೊಳಕ್ಕೆ ನೈಸಾಗಿ ಸೇರಿಕೊಂಡು ಸಹಕಾರ ನೀಡಿದ್ದರು. ಈಗ ಅವರೇ ಅಧಿಕಾರದಲ್ಲಿ ಇದ್ದಾರೆ. ಅದಕ್ಕೆ ಎರಡೂ ಪಕ್ಷಗಳ ವತಿಯಿಂದ ಈ ವಿಷಯವನ್ನು ಪ್ರಸ್ತಾಪ ಮಾಡಿದ್ದೇವೆ. ಅಲ್ಲದೆ; ನೈಸ್ ರಸ್ತೆಯ ಸುತ್ತಮುತ್ತ ನಮ್ಮ ಪಕ್ಷವೂ ಒಳಗೊಂಡಂತೆ ಬೇರೆ ಯಾವುದೇ ಪಕ್ಷದ ರಾಜಕಾರಣಿಗಳ‌ ಭೂಮಿ ಇದ್ದರೆ ಈ ಕೂಡಲೇ ಮುಟ್ಟುಗೋಲು ಹಾಕಿಕೊಳ್ಳಲಿ.

2012ರೊಳಗೆ ಕಾಂಕ್ರೀಟ್ ರಸ್ತೆ ಮಾಡದೆ ಟೋಲ್ ಸಂಗ್ರಹ ಮಾಡುವಂತಿಲ್ಲ ಎನ್ನುವ ಷರತ್ತು ಯೋಜನೆಯಲ್ಲಿ ಇದೆ. ಆದರೆ, ಅಕ್ರಮವಾಗಿ ಟೋಲ್ ಸಂಗ್ರಹ ಮಾಡಲಾಗಿದೆ. ಈವರೆಗೂ ವಸೂಲು ಮಾಡಲಾಗಿರುವ 1325 ಕೋಟಿ ರೂಪಾಯಿ ಟೋಲ್ ಹಣವನ್ನು ಸರ್ಕಾರ ವಾಪಸ್ ಪಡೆಯಬೇಕು ಎಂದು ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ. ಸರಕಾರ ಕೂಡಲೇ ಹಣ ವಾಪಸ್ ಪಡೆಯಬೇಕು.

ಈ ಯೋಜನೆ ಬಗ್ಗೆ ಮಾತನಾಡಲೇಬಾರದು ಎಂದು ಮಾಜಿ ಪ್ರಧಾನಿ ದೇವೇಗೌಡರಿಗೆ 2 ಕೋಟಿ, ಮಾಜಿ ಸಚಿವ ಮಾಧುಸ್ವಾಮಿ ಅವರಿಗೆ 5 ಲಕ್ಷ ದಂಡ ಹಾಕಿದ್ದರು. ಈ ಸಂದರ್ಭದಲ್ಲಿ ಬೊಮ್ಮಾಯಿ ಸರ್ಕಾರ ಬಿಗಿ ಕ್ರಮಗಳನ್ನು ಕೈಗೊಂಡು, ಅದರ ಪರಿಣಾಮವಾಗಿ ಒಂದಿಷ್ಟು ನ್ಯಾಯಾಲಯ ಆ ಕಂಪನಿಗೆ ಛೀಮಾರಿ ಹಾಕಿದೆ. ಈಗ ಅಲ್ಲಲ್ಲಿ ವೈಟ್ ಟ್ಯಾಪಿಂಗ್ ರಸ್ತೆ ಮಾಡುತ್ತಿದ್ದಾರೆ.

ನೈಸ್ ಅಕ್ರಮ ಇತಿಹಾಸದಲ್ಲಿ ಹಿಂದೆಂದೂ ಕಂಡೂ ಕೇಳರಿಯದ ಅಕ್ರಮ. ಇದರ ವಿರುದ್ಧ ಸದನದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ಟಿ.ಬಿ.ಜಯಚಂದ್ರ ದನಿ ಎತ್ತಿದ್ದಾರೆ. ಅದರ ಅಕ್ರಮವನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಹೀಗಾಗಿ ಸರಕಾರ ಮೀನಾಮೇಷ ಎಣಿಸದೆ ಯೋಜನೆಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಹಾಗೂ ಇಡೀ ಯೋಜನೆಯ ತನಿಖೆಯನ್ನು ಸಿಬಿಐಗೆ ವಹಿಸಬೇಕು.

ಹಿಂದಿನ ಬಿಜೆಪಿ ಸರಕಾರದ ವೇಳೆ ಸಂಪುಟದ ಉಪ ಸಮಿತಿ ರಚನೆ ಮಾಡಲಾಗಿತ್ತು. ಸಮಿತಿಯು ಅನೇಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಶಿಫಾರಸು ಮಾಡಿದೆ. ರಸ್ತೆ ಕಾಮಗಾರಿಗೆ ರೈತರಿಂದ ಸ್ವಾಧೀನಕ್ಕೆ ಪಡೆದ ಭೂಮಿಯನ್ನು ಮಾರಾಟ ಮಾಡಿ ರಿಯಲ್ ಎಸ್ಟೇಟ್ ದಂಧೆ ನಡೆಸಲಾಗಿದೆ.

ಬಸವರಾಜ ಬೊಮ್ಮಾಯಿ‌ ಅವರು ಹೇಳಿದ್ದು;

ನೈಸ್ ಯೋಜನೆಯಲ್ಲಿ ಅಕ್ರಮದ ಬಗ್ಗೆ ನಮ್ಮ ಕಾಲದಲ್ಲಿ ಅನೇಕ ಕ್ರಮಗಳು ಆಗಿವೆ. ಆ ನಿಟ್ಟಿನಲ್ಲಿ ಜೆಡಿಎಸ್ - ಬಿಜೆಪಿ ಒಂದಾಗಿ ಹೋರಾಟ ಮಾಡಲು ನಿರ್ಧಾರ ಮಾಡಿವೆ. ಈ ಹೋರಾಟ ಇಲ್ಲಿಗೆ ನಿಲ್ಲುವುದಿಲ್ಲ, ಬದಲಿಗೆ ಅನೇಕ ತಿರುವುಗಳು ಇರುತ್ತವೆ.

ಈ ರಸ್ತೆ ಕಾಮಗಾರಿಗೆ ಹೆಚ್ಚುವರಿ ಸಾಕಷ್ಟು ಭೂಮಿಯನ್ನೂ ಪಡೆದುಕೊಳ್ಳಲಾಗಿದೆ. ಈ ಹೆಚ್ಚುವರಿ ಭೂಮಿಯನ್ನು ಏನು ಮಾಡಬೇಕು ಎನ್ನುವ ಬಗ್ಗೆ ನಿರ್ಧಾರ ಕೈಗೊಳ್ಳುವ ಅಧಿಕಾರ ಸರಕಾರಕ್ಕೆ ಇದೆ ಎಂಬ ಮಾತನ್ನು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಹೇಳಿದೆ. ಅಲ್ಲದೆ, ಮತ್ತೆ ಹೊಸದಾಗಿ ಜಾಮೀನು ಸ್ವಾಧೀನಕ್ಕೆ ಪಡೆಯುವ ಹುನ್ನಾರವನ್ನು ನೈಸ್ ಕಂಪನಿ ನಡೆಸಿದೆ.

ಮುಖ್ಯವಾಗಿ ನೈಸ್ ಯೋಜನೆಗೆ ನೀಡಲಾಗಿರುವ ಹೆಚ್ಚುವರಿ ಭೂಮಿಯನ್ನು ಕಾನೂನು ಪ್ರಕಾರವೇ ಹಿಂಪಡೆಯಲು ಸಂಪುಟ ಉಪ ಸಮಿತಿ ಕೂಡ ಸ್ಪಷ್ಟವಾಗಿ ಶಿಫಾರಸು ಮಾಡಿದೆ. ಈ ನಿಟ್ಟಿನಲ್ಲಿ ಈಗಿನ ರಾಜ್ಯ ಸರಕಾರ ನೈಸ್ ಯೋಜನೆಯಿಂದ ಹೆಚ್ಚುವರಿ ಭೂಮಿಯನ್ನು ಈ ಕೂಡಲೇ ವಾಪಸ್ ಪಡೆಯಲು ನಿರ್ಧಾರ ಕೈಗೊಳ್ಳಬೇಕು.

ಹೆಚ್ಚುವರಿ ಜಮೀನು ಅಂತಿಮವಾಗಿ ರಿಯಲ್ ಎಸ್ಟೇಟ್ ದಂಧೆಗೆ ಬಳಕೆ ಆಗುತ್ತಿದೆ. ಸರಕಾರ ಅದನ್ನು ತಡೆದು ವಶಕ್ಕೆ ಪಡೆಯಬೇಕು. ಈಗಾಗಲೇ ಬೆಂಗಳೂರು ಮೈಸೂರು ನಡುವೆ ಸುಸಜ್ಜಿತ ಎಕ್ಸ್ ಪ್ರೆಸ್ ಹೆದ್ದಾರಿ ನಿರ್ಮಾಣ ಆಗಿರುವುದರಿಂದ ನೈಸ್ ರಸ್ತೆ ಅಗತ್ಯ ಇಲ್ಲ. ಟೋಲ್ ಕೂಡ ಹೆಚ್ಚುವರಿಯಾಗಿ ಸಂಗ್ರಹ ಆಗಿದ್ದು, ಅದರ ಲೆಕ್ಕಪರಿಶೋಧನೆ ನಡೆಸಿ ಹಣವನ್ನು ವಸೂಲಿ ಮಾಡಬೇಕು.

ಸದನ ಸಮಿತಿ ವರದಿ, ಸಂಪುಟ ಉಪ ಸಮಿತಿ ವರದಿ, ಸುಪ್ರೀಂ ಕೋರ್ಟ್ ಆದೇಶದ ಆಧಾರದಲ್ಲಿ ಸರಕಾರದ ಕ್ರಮ ಕೈಗೊಳ್ಳಬೇಕು. ಈ ವಿಚಾರದಲ್ಲಿ ರಾಜ್ಯ ಸರಕಾರದ ಸ್ಪಷ್ಟ ನಿಲುವು ತಿಳಿಸಬೇಕು. ಈ ಸರಕಾರದಲ್ಲಿ ಇರುವವರು ಈ ಹಿಂದೆ ಈ ಯೋಜನೆಗೆ ಸಂಬಂಧಿಸಿ ಹೇಗೆ ನಡೆದುಕೊಂಡಿದ್ದಾರೆ ಎನ್ನುವುದು ನಮಗೆ ಗೊತ್ತಿದೆ. ಈ ಸರಕಾರ ಭ್ರಷ್ಟಾಚಾರದ ವಿರುದ್ದ ಇದೆಯೊ‌ ಇಲ್ಲವೋ ಅನ್ನುವುದು ಈ ಪ್ರಕರಣದಿಂದ ತಿಳಿಯಲಿದೆ.

ಮಾಧ್ಯಮಗೋಷ್ಠಿಯಲ್ಲಿ ಮಾಜಿ ಸಚಿವರಾದ ಅರಗ ಜ್ಞಾನೇಂದ್ರ, ಜೆಡಿಎಸ್ ಶಾಸಕಾಂಗ ಪಕ್ಷದ ಉಪ ನಾಯಕಿ ಶಾರದಾಪೂರ್ಯ ನಾಯಕ್, ಶಾಸಕರಾದ ನೆಮಿರಾಜ್ ನಾಯಕ್, ರಾಜೂಗೌಡ, ಕರೆಮ್ಮ ನಾಯಕ್, ಕೆ. ಎ.ತಿಪ್ಪೇಸ್ವಾಮಿ ಸೇರಿದಂತೆ ಅನೇಕರು ಹಾಜರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ