Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

5 ವರ್ಷದಲ್ಲಿ 25 ಕೋಟಿ ಸಸಿ ನೆಡುವ ಸಂಕಲ್ಪ: ಈಶ್ವರ ಖಂಡ್ರೆ

ಸುದ್ದಿಮೂಲ ವಾರ್ತೆ

ಬೆಂಗಳೂರು, ಜೂ.23: ಪ್ರಸಕ್ತ ವರ್ಷ ರಾಜ್ಯಾದ್ಯಂತ 5 ಕೋಟಿ ಸಸಿಗಳನ್ನು ನೆಟ್ಟು, ಅವು ಮರವಾಗಿ ಬೆಳೆಯುವಂತೆ ಕಾಳಜಿ ವಹಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.

ವಿಕಾಸಸೌಧದಲ್ಲಿಂದು ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯ್ತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಪ್ರತಿ ವರ್ಷ 5 ಕೋಟಿ ಸಸಿಗಳಂತೆ ಮುಂದಿನ ಐದು ವರ್ಷಗಳಲ್ಲಿ 25 ಕೋಟಿ ಸಸಿಗಳನ್ನು ನಡೆಲು ಉದ್ದೇಶಿಸಲಾಗಿದೆ. ಕೇವಲ ಸಸಿಗಳನ್ನು ನೆಡುವುದರ ಜೊತೆಗೆ ಎಷ್ಟು ಸಸಿಗಳು ಉಳಿದಿವೆ ಎಂಬ ಬಗ್ಗೆ ಜಿಯೋ ಟ್ಯಾಗ್ ಮೂಲಕ ಆಡಿಟ್ ಮಾಡಿಸಲಾಗುವುದು ಎಂದು ಹೇಳಿದರು.

ಸಚಿವರು, ಅರಣ್ಯ ವ್ಯಾಪ್ತಿ, ಹಸಿರು ವ್ಯಾಪ್ತಿ ಹೆಚ್ಚಿಸುವುದು ಸರ್ಕಾರದ ಗುರಿಯಾಗಿದೆ. ಒಟ್ಟಾರೆ ಭೌಗೋಳಿಕ ಪ್ರದೇಶದ ಪೈಕಿ ಅರಣ್ಯ ಹಾಗೂ ಹಸಿರು ವ್ಯಾಪ್ತಿ ಕನಿಷ್ಠ ಶೇ.33ಕ್ಕೆ ಇರಬೇಕು ಎಂಬುದು ಮಾನದಂಡ. ಆದರೆ ಪ್ರಸ್ತುತ ರಾಜ್ಯದಲ್ಲಿ ಈ ವ್ಯಾಪ್ತಿ ಸುಮಾರು 20.19ರಷ್ಟು ಮಾತ್ರವೇ ಇದ್ದು, ಸರ್ಕಾರ ವ್ಯಾಪ್ತಿ ಹೆಚ್ಚಳವನ್ನು ಆದ್ಯ ಕರ್ತವ್ಯ ಎಂದು ಪರಿಗಣಿಸಿದೆ ಎಂದರು.

ನಾವು ಪ್ರಕೃತಿ ಪರಿಸರ ರಕ್ಷಿಸಿದರೆ ಪ್ರಕೃತಿ ನಮ್ಮನ್ನು ರಕ್ಷಿಸುತ್ತದೆ. ಅರಣ್ಯ ಇಲಾಖೆ ಮುಖ್ಯವಾಗಿ ಅರಣ್ಯ ಸಂರಕ್ಷಿಸಬೇಕು. ಆ ಕಾರ್ಯವನ್ನು ಇಲಾಖೆ ಮಾಡುತ್ತದೆ. ಮಕ್ಕಳಲ್ಲಿ ಪರಿಸರ ಕಾಳಜಿ ಮೂಡಿಸಲು ಯೋಜನೆ ರೂಪಿಸಿದ್ದು, ಶಿಕ್ಷಣ ಇಲಾಖೆಯೂ ಸೇರಿದಂತೆ ರಾಜ್ಯ ಸರ್ಕಾರದ ಎಲ್ಲ ಇಲಾಖೆಗಳ ಸಹಯೋಗದಲ್ಲಿ ಪ್ರಸಕ್ತ ವರ್ಷ 5 ಕೋಟಿ ಸಸಿ ನೆಟ್ಟು, ಪೋಷಿಸುವ ಮೂಲಕ ಯೋಜನೆಯನ್ನು ಯಶಸ್ವಿಗೊಳಿಸಲಾಗುವುದು ಎಂದರು.

ಕೋವಿಡ್ ಸಂದರ್ಭದಲ್ಲಿ ಆಕ್ಸಿಜನ್ ಎಷ್ಟು ಮಹತ್ವದ್ದು ಎಂಬುದು ಇಡೀ ಮಾನವ ಕುಲಕ್ಕೆ ಅರಿವಾಯಿತು. ಹೀಗಾಗಿ ನಮಗೆ ಪ್ರಾಣವಾಯು ನೀಡುವ ವೃಕ್ಷಗಳನ್ನು ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿದ್ದು, ಮಾಧ್ಯಮಗಳು ಈ ನಿಟ್ಟಿನಲ್ಲಿ ಜನಜಾಗೃತಿ ಮೂಡಿಸಬೇಕು ಎಂದರು.

ಜುಲೈ 1ರಿಂದ 7 ದಿನಗಳ ಕಾಲ ಆಚರಿಸಲಾಗುತ್ತಿರುವ ವನಮಹೋತ್ಸವಕ್ಕಾಗಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯಲ್ಲಿ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಪಂಚಾಯ್ತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೂ ಇದ್ದು, ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಸದಸ್ಯ ಕಾರ್ಯದರ್ಶಿ ಆಗಿರುತ್ತಾರೆ. ಜಿಲ್ಲೆಯ ಇತರ ಎಲ್ಲ ಇಲಾಖೆಗಳ ಸಹಯೋಗದೊಂದಿಗೆ ಈ ಕಾರ್ಯಕ್ರಮ ರೂಪಿಸಲಾಗಿದೆ ಎಂದರು.

ಹಸಿರು ವ್ಯಾಪ್ತಿ ಹೆಚ್ಚಳ ಕೇವಲ ಅರಣ್ಯ ಇಲಾಖೆ ಒಂದರಿಂದ ಆಗುವ ಕಾರ್ಯವಲ್ಲ. ಇದರಲ್ಲಿ ಇಡೀ ಸಮಾಜ ಪಾಲ್ಗೊಳ್ಳಬೇಕು. ಪ್ರತಿಯೊಬ್ಬರೂ ಸಸಿ ನೆಟ್ಟು ಬೆಳೆಸುವುದು ತಮ್ಮ ಕರ್ತವ್ಯ ಎಂದು ತಿಳಿಯಬೇಕು. ಆಬಾಲವೃದ್ಧರಾದಿಯಾಗಿ ಎಲ್ಲರೂ ಕೈಜೋಡಿಸಿದರೆ ಇದು ಜನಾಂದೋಲನವಾಗುತ್ತದೆ ಎಂದರು.

ಇಂದು ಹಸಿರು ವ್ಯಾಪ್ತಿ ಕ್ಷೀಣಿಸುತ್ತಿರುವುದರ ಪರಿಣಾಮವಾಗಿ ಮತ್ತು ಕೈಗಾರಿಕೆಗಳು, ವಾಹನಗಳು ಮತ್ತು ಮನೆಗಳಲ್ಲಿ ಎಲೆಕ್ಟ್ರಿಕ್ ಉಪಕರಣಗಳಿಂದ ಹೊರಹೊಮ್ಮುವ ಶಾಖ, ತ್ಯಾಜ್ಯ, ಹೊಗೆಯಿಂದ ಹಸಿರು ಮನೆ ಅನಿಲ ಪ್ರಮಾಣ ಹೆಚ್ಚಾಗಿ ಓಜೋನ್ ಪದರಕ್ಕೂ ಹಾನಿಯಾಗಿ ಹವಾಮಾನ ವೈಪರೀತ್ಯ ಆಗುತ್ತಿರುವುದು ನಮಗೆಲ್ಲಾ ತಿಳಿದ ವಿಷಯವಾಗಿದೆ. ಕುಡಿಯುವ ನೀರು, ಸೇವಿಸುವ ಗಾಳಿ ಮಲಿನವಾಗುತ್ತಿದೆ. ಈ ಬಗ್ಗೆ ಎಲ್ಲರಲ್ಲೂ ಜಾಗೃತಿ ಮೂಡಬೇಕು. ನಾವೆಲ್ಲರೂ ಸೇರಿ ಪ್ರಕೃತಿ ಪರಿಸರ ಉಳಿಸಬೇಕು ಎಂದು ಈಶ್ವರ ಖಂಡ್ರೆ ಹೇಳಿದರು.

ನಮ್ಮ ಅರಣ್ಯ ಇಲಾಖೆ 5 ಕೋಟಿ ಸಸಿ ನೆಡಲೆಂದೇ ತನ್ನ ನರ್ಸರಿಗಳಲ್ಲಿ ವ್ಯಾಪಕ ಶ್ರೇಣಿಯ ಸಸಿ ಬೆಳೆಸಿದೆ. 2.5 ಕೋಟಿಯಷ್ಟು ಸಸಿಗಳನ್ನು ಅರಣ್ಯ ವ್ಯಾಪ್ತಿಯಲ್ಲಿ ಇಲಾಖೆಯ ವತಿಯಿಂದ ನೆಡಲಾಗುತ್ತಿದೆ ಎಂದರು.

ದರ ಇಳಿಕೆ: ತಾವು ಅಧಿಕಾರ ವಹಿಸಿಕೊಳ್ಳುವ ಮೊದಲೇ ರೈತರಿಗೆ ಪೂರೈಕೆ ಮಾಡುತ್ತಿದ್ದ ಸಸಿಗಳ ದರವನ್ನು ಹೆಚ್ಚಳ ಮಾಡಲಾಗಿತ್ತು. ಈ ಬಗ್ಗೆ ಪುನರ್ ಪರಿಶೀಲನೆ ಮಾಡಿ, 5x8 ಗಿಡಗಳಿಗೆ 2 ರೂ., 6 x8 ಗಿಡಗಳಿಗೆ 3 ರೂ. ಮತ್ತು 8 x12 ಗಿಡಗಳಿಗೆ 6 ರೂ. ನಿಗದಿ ಮಾಡಲಾಗಿದೆ ಎಂದು ವಿವರಿಸಿದರು.

ಅಕೇಶಿಯಾ ಮತ್ತು ನೀಲಗಿರಿ ಗಿಡಗಳಿಂದಾಗುವ ದುಷ್ಪರಿಣಾಮದ ಬಗ್ಗೆಯೂ ಕ್ರಮ ವಹಿಸುವ ಭರವಸೆ ನೀಡಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ