ಬಿಜೆಪಿಯಿಂದ ‘ಮೋಸ ನಿಲ್ಲಿಸಿ, ಗ್ಯಾರಂಟಿ ಜಾರಿಗೊಳಿಸಿ’ ಹೋರಾಟ: ರಾಜಕುಮಾರ ಪಾಟೀಲ್ ತೇಲ್ಕೂರ
ಕಲಬುರಗಿ, ಜು.3: ಗ್ಯಾರಂಟಿಗಳನ್ನು ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ತಮ್ಮ ಆಶ್ವಾಸನೆ ಈಡೇರಿಸದೆ ಮಾತಿಗೆ ತಪ್ಪಿದೆ. ಇದರ ವಿರುದ್ಧ ‘ಮೋಸ ನಿಲ್ಲಿಸಿ, ಗ್ಯಾರಂಟಿ ಜಾರಿಗೊಳಿಸಿ’ ಹೋರಾಟಕ್ಕೆ ಬಿಜೆಪಿ ಮುಂದಾಗಿದೆ ಎಂದು ರಾಜ್ಯ ವಕ್ತಾರ ರಾಜಕುಮಾರ ಪಾಟೀಲ್ ತೇಲ್ಕೂರ ಅವರು ತಿಳಿಸಿದರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು,
ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ಬಳಿಕ ಗ್ಯಾರಂಟಿ ಅನುಷ್ಠಾನದ ವಿಚಾರದಲ್ಲಿ ಭಂಡತನ ತೋರುತ್ತಿದೆ. ಕಂಡಿಷನ್ ಇಲ್ಲದೆ ಗ್ಯಾರಂಟಿಗಳನ್ನು ಜಾರಿ ಮಾಡಲು ಆಗ್ರಹಿಸಿ ಸದನದ ಒಳಗೆ ಮತ್ತು ಹೊರಗೆ ಹೋರಾಟ ನಡೆಸಲಿದ್ದೇವೆ ಎಂದು ಹೇಳಿದರು.
ಶೇ 50ಕ್ಕಿಂತ ಹೆಚ್ಚು ವಿದ್ಯುತ್ ದರ ಏರಿಸಿದ್ದಾರೆ. ಇದರಿಂದ ಬೆಲೆ ಏರಿಕೆ ಆಗುತ್ತಿದೆ ,ಬೆಲೆ ಏರಿಕೆಯನ್ನು ಇಳಿಸಲು ಆಗ್ರಹಿಸಿದರು. ಈ ಸರಕಾರ ಬೆಲೆ ಏರಿಕೆ, ಭ್ರಷ್ಟಾಚಾರಕ್ಕೆ ಸಾಕ್ಷಿಯಾಗುತ್ತಿದೆ ಎಂದು ಆರೋಪಿಸಿದರು. ಕೈಗಾರಿಕೆಗಳು, ಜನಸಾಮಾನ್ಯರು ವಿದ್ಯುತ್ ದರ ಏರಿಕೆಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ,
ಗ್ಯಾರಂಟಿಗಳನ್ನು ಘೋಷಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದಾಕ್ಷಣ ಅವುಗಳ ಅನುಷ್ಠಾನ ಮಾಡುವುದಾಗಿ ತಿಳಿಸಿತ್ತು. ಆದರೆ ಅದನ್ನು ಜಾರಿಗೊಳಿಸುವಲ್ಲಿ ವಿಫಲವಾಗಿದೆ.
ಗ್ಯಾರಂಟಿಗಳ ಅನುಷ್ಠಾನಕ್ಕೆ ಆಗ್ರಹಿಸಿ ಇದೇ 4ರಂದು ಹೋರಾಟ ರೂಪಿಸಲಾಗುತ್ತಿದೆ .ಸದನದ ಹೊರಗೆ ಪಕ್ಷದ ಹಿರಿಯರಾದ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಸದನದ ಒಳಗೆ ಶಾಸಕರ ಹೋರಾಟ ನಡೆಯಲಿದೆ. 10 ಕೆಜಿ ಅಕ್ಕಿ ಈಗ 5 ಕೆಜಿಗೆ ಬಂದಿದೆ. ಈಗ 5 ಕೆಜಿ ಕೊಡಲು ಬಹಳ ಕಷ್ಟಪಡುತ್ತಿದ್ದಾರೆ ಎಂದು ಟೀಕಿಸಿದರು. ಮಾತಿನಂತೆ 10 ಕೆಜಿ ಅಕ್ಕಿ ಕೊಡಿ
200 ಯೂನಿಟ್ ಉಚಿತ ವಿದ್ಯುತ್ ಎಂದಿದ್ದರು. ಈಗ 200 ಯೂನಿಟ್ ಮಾಯವಾಗಿ 10 ತಿಂಗಳ ಸರಾಸರಿ ಮಾಡಿ ಹೆಚ್ಚುವರಿ ಶೇ 10 ಕರೆಂಟ್ ಕೊಡುವ ಮಾತನಾಡುತ್ತಿದ್ದಾರೆ. ಕಂಡಿಷನ್ ಇಲ್ಲದೆ 200 ಯೂನಿಟ್ ವಿದ್ಯುತ್ ಕೊಡುವಂತೆ ಒತ್ತಾಯಿಸಿದರು.
ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಮಹಿಳೆಗೆ 2 ಸಾವಿರ ರೂ. ಕೊಡುವುದಾಗಿ ಪ್ರಿಯಾಂಕ ಗಾಂಧಿ ಅವರೇ ಘೋಷಿಸಿದ್ದರು. ಈಗ ಮನೆಯೊಡತಿಗೆ ಮಾತ್ರ ಎನ್ನುವ ಮೂಲಕ ಮನೆಯಲ್ಲಿ ಜಗಳ ತಂದಿಡುವ ಕೆಲಸ ಮಾಡುತ್ತಿದ್ದಾರೆ. ಪ್ರತಿ ಮಹಿಳೆಗೂ ಹಣ ಕೊಡಿ ಎಂದು ಒತ್ತಾಯಿಸಿದರು.
2022-23ರಲ್ಲಿ ಪಾಸಾಗಿ ಉದ್ಯೋಗ ಸಿಗದವರು ಮಾತ್ರ ನಿರುದ್ಯೋಗಿಗಳೇ? ಹಿಂದಿನ ನಿರುದ್ಯೋಗಿಗಳನ್ನು ಪರಿಗಣಿಸಬೇಕಲ್ಲವೇ ಎಂದು ಕೇಳಿದ ಅವರು, ಚುನಾವಣೆ ವೇಳೆ ಇದೇ ಮಾತನ್ನು ಹೇಳಿದ್ದೀರಾ ಪ್ರತಿಯೊಬ್ಬ ಪದವಿ ಪಡೆದು ನಿರುದ್ಯೋಗಿ ಆಗಿರುವವರಿಗೆ 3 ಸಾವಿರ ಮತ್ತು ಡಿಪ್ಲೊಮಾ ನಿರುದ್ಯೋಗಿಗಳಿಗೆ 1,500 ರೂ. ಭತ್ಯೆ ಕೊಡಬೇಕು ಎಂದು ಅವರು ತಿಳಿಸಿದರು.
ಶಕ್ತಿ ಯೋಜನೆಯಡಿ ಸಾಕಷ್ಟು ಬಸ್ಸುಗಳಿಲ್ಲ. ಮೂರು ಮತ್ತೊಂದು ಬಸ್ಗಳಿವೆ. ಹಲವಷ್ಟು ರಿಪೇರಿಗೆ ಬಂದಿವೆ. ವಿದ್ಯಾರ್ಥಿಗಳಿಗೆ, ಕೆಲಸಕ್ಕೆ ಹೋಗುವವರಿಗೆ ಅನಾನುಕೂಲತೆ ಉಂಟಾಗಿದೆ. ಬೇಕಾಬಿಟ್ಟಿ ಘೋಷಣೆ ಮಾಡಿದ್ದಾರೆ. ಅವರಾಗಲೀ, ಅವರ ಕುಟುಂಬದವರಾಗಲೀ ಈ ಬಸ್ಗಳಲ್ಲಿ ಓಡಾಡಬೇಕಿಲ್ಲವಲ್ಲವೇ ಎಂದು ಕೇಳಿದರು. ಜನರಿಗೆ ನರಕಯಾತನೆ ಆಗುತ್ತಿದೆ ಎಂದು ಹೇಳಿದರು.
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.